ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್ಗೆ ಡೆತ್ನೋಟ್ ವಾಟ್ಸ್ ಆ್ಯಪ್ ಮೆಸೇಜ್ ಕಳುಹಿಸಿ ಸಂತೋಷ್ ನಾಪತ್ತೆಯಾಗಿದ್ದರು.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.
ನನ್ನ ಸಾವಿಗೆ ಈಶ್ವರಪ್ಪರೇ ಕಾರಣ, ಡೆತ್ ನೋಟ್:
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರೇ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಮಾಧ್ಯಮಗಳಿಗೆ ಆತ್ಮಹತ್ಯೆ ಸಂದೇಶವನ್ನು ಕಳುಹಿಸಿ, ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ . ವಾಟ್ಸಾಪ್ ಮೂಲಕ ಮೆಸೇಜ್ ಮಾಡಿರುವ ಸಂತೋಷ್, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ. ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಮೆಸೇಜ್ನಲ್ಲಿ ತಿಳಿಸಿದ್ದಾರೆ.
ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪನವರು ಸಹಾಯ ಹಸ್ತ ನೀಡಬೇಕು. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಸಂತೋಷ್ ಮಾಧ್ಯಮಕ್ಕೆ ಸಂದೇಶ್ ಕಳುಹಿಸಿದ್ದಾರೆ.
ವಿಧಿ ವಿಜ್ಞಾನ ತಂಡ ಆಗಮನ:
ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಂಭವಿ ಲಾಡ್ಜ್ಗೆ ಎಸ್ಪಿ ಹಾಗೂ ಎಎಸ್ಪಿ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ತಂಡ ಆಗಮಿಸಲಿದೆ.