dtvkannada

ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತ ಹಲವು ಮಂದಿಯ ದಾರುಣ ಸಾವಿಗೆ ಕಾರಣವಾಗಿದೆ. ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳ ಭೂಕುಸಿತ ಪ್ರದೇಶಗಳಲ್ಲಿ ರಕ್ಷಣೆ ಮತ್ತು ತೆರವು ಕಾರ್ಯಾಚರಣೆ ವೇಳೆ ಹೃದಯವಿದ್ರಾವಕ ದೃಶ್ಯಗಳು ಕಂಡುಬಂದಿವೆ.

ತಾಯಿ ಮತ್ತು ಮಗುವಿನ ಮೃತದೇಹ ಪರಸ್ಪರ ತಬ್ಬಿಕೊಂಡಿರುವ ಸ್ಥಿತಿಯಲ್ಲೇ ಪತ್ತೆಯಾಗಿದೆ. ಮತ್ತೊಂದು ಕಂದಮ್ಮ ತೊಟ್ಟಿಲಿನಲ್ಲಿ ನಿದ್ರಿಸುತ್ತಿರುವಾಗಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಪತ್ತಿನಿಂದಾಗಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಹತ್ತಾರು ಮಂದಿ ಕಣ್ಮರೆಯಾಗಿದ್ದಾರೆ.

ಕೋಟಯಂನ ಕೂಟ್ಟಿಕ್ಕಲ್ ಎಂಬಲ್ಲಿ ಎರಡು ಕಡೆ ಭೂಕುಸಿತ ಪ್ರದೇಶಗಳಿಂದ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ 12 ಮಂದಿಯ ಮೃತದೇಹವನ್ನು ಅವಶೇಷಗಳಡಿಯಿಂದ ಹೊರ ತೆಗೆಯಲಾಗಿದೆ.
ಇಡುಕ್ಕಿ ಜಿಲ್ಲೆಯ ಕೊಕ್ಕಯಾರ್‌ನಲ್ಲಿ ತಾಯಿ–ಇಬ್ಬರು ಮಕ್ಕಳು ಸೇರಿದಂತೆ ಆರು ಮೃತದೇಹಗಳು ಪತ್ತೆಯಾಗಿವೆ. ಒಬ್ಬ ಮಹಿಳೆ ಹಾಗೂ ಮಗು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಶ್ವಾನಗಳನ್ನೂ ಶೋಧ ಕಾರ್ಯದಲ್ಲಿ ಬಳಸಿಕೊಳ್ಳಲಾಗಿದೆ. ಕೇರಳದ ಕೇಂದ್ರ ಹಾಗೂ ದಕ್ಷಿಣ ಭಾಗಗಳಲ್ಲಿ ಭಾನುವಾರ ಮಳೆ ತುಸು ಕಡಿಮೆಯಾಗಿದ್ದರೂ ಬುಧವಾರದಿಂದ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ಘೋಷಿಸಲಾಗಿದೆ.
ಕೋಟಯಂ ಮತ್ತು ಪತ್ತನಂತಿಟ್ಟ ಜಿಲ್ಲೆಯಲ್ಲಿ ಪ್ರವಾಹ ಇಳಿಕೆಯಾಗಿದ್ದರೂ ಅನೇಕ ಪ್ರದೇಶಗಳು ಜಲಾವೃತವಾಗಿಯೇ ಇವೆ. ಆ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!