ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು. ಬೆಂಗಳೂರಿನಲ್ಲಿ 7 ಲಕ್ಷ ಮಕ್ಕಳನ್ನ ಬಿಬಿಎಂಪಿ ಗುರುತಿಸಿದೆ.
ಶಾಲೆ ಕಾಲೇಜುಗಳಲ್ಲೇ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದ್ದು, ನಾಳೆಯೊಳಗೆ 10ರಿಂದ 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುವ ನಿರೀಕ್ಷೆ ಇದೆ. ಈ ಹಿಂದೆ ಕಾಲೇಜುಗಳಲ್ಲಿ ಲಸಿಕೆ ನೀಡಿದ ಮಾದರಿಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ವ್ಯಾಕ್ಸಿನ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಲಸಿಕಾ ಕೇಂದ್ರಗಳ ಬಳಿ 30 ನಿಮಿಷಗಳ ವಿಶ್ರಾಂತಿ ಪಡೆಯಲು ಸಹಕಾರಿಯಾಗುವಂತೆ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಲಸಿಕೆ ನೀಡುವ ಎಲ್ಲಾ ಶಾಲೆಗಳ ಬಳಿ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ.
2007ರ ನಂತ್ರ ಹುಟ್ಟಿದವರು ಇಂದಿನಿಂದ ಲಸಿಕೆ ಪಡೆದುಕೊಳ್ಳಬಹುದು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಡ್ರೈವ್ ನಡೆಯಲಿದ್ದು, ನೋಂದಣಿ ಮಾಡಿಕೊಂಡು ವ್ಯಾಕ್ಸಿನ್ ಪಡೆದುಕೊಳ್ಳಬಹುದಾಗಿದೆ.
ದಕ್ಷಿಣ ಕನ್ನಡ ಮತ್ತು ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ಇಂದಿನಿಂದ ಜ.10ರ ವರೆಗೆ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1,01,549 ಮತ್ತು ಉಡುಪಿ ಜಿಲ್ಲೆಯಲ್ಲಿ 53,555 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.
