ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದಲ್ಲಿ ಇತ್ತೀಚೆಗೆ ನಡೆದಿದ್ದ ಹಿಂದು ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಬಂದಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯ ಜಾಮೀನು ಮಂಜೂರು ಮಾಡಿದೆ.

ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ರಿ ಪ್ರಕರಣದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಕೈವಾಡವಿದೆಯೆಂದು ಸಂಶಯ ವ್ಯಕ್ತಪಡಿಸಿ ಪಿಎಫ್ಐ ಸಂಘಟನೆಯ ಝಕರಿಯ ಕೊಡಿಪ್ಪಾಡಿ ಮತ್ತು ಎಸ್ಡಿಪಿಐ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಮುಸ್ತಫ ಕಡವಿನಬಾಗಿಲು ಅವರನ್ನು ಬಂದಿಸಲಾಗಿತ್ತು. ಇದೀಗ ಅವರಿಗೆ ಜಾಮೀನು ಮಂಜೂರು ಆಗಿದೆ.
ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅಶ್ರಫ್ ಅಗ್ನಾಡಿ, ಮಜೀದ್ ಖಾನ್ ಮತ್ತು ಅಬ್ದುಲ್ ರಹಿಮಾನ್ ವಾದಿಸಿದ್ದರು.
ಮುಖಂಡರ ಬಂಧನವನ್ನು ಖಂಡಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಭಾಗದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ತನ್ನ ನಾಯಕರ ಅಕ್ರಮ ಬಂಧನದ ಕುರಿತು ಅಸಹನೆಯನ್ನು ವ್ಯಕ್ತಪಡಿಸಿದ್ದರು. ನಂತರದಲ್ಲಿ ಪ್ರತಿಭಟನಾಕಾರರ ಮೇಲೆ ಅಮಾನುಷವಾಗಿ ಲಾಠಿಚಾರ್ಜ್ ಮಾಡಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು.
ಈ ಕುರಿತಾಗಿ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡು ಸುಮಾರು 20 ಜನರನ್ನು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಈ ನಡುವೆ ಝಕರಿಯ ಮತ್ತು ಮುಸ್ತಫ ರವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪುತ್ತೂರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ .
